ನಿರಂತರ ಮಳೆಯಿಂದ ಬೆಳೆ ಹಾನಿ: ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಪರಿಶೀಲನೆ
ಬೀದರ್ (ಸೆ.19): ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಕಬ್ಬು, ಶುಂಠಿ, ಹೆಸರು, ತೊಗರಿ, ಉದ್ದು, ಸೋಯಾ (ಸೋಯಾಬೀನ್) ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿದ್ದು, ಕೃಷಿ ಅಧಿಕಾರಿಗಳೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಬೆಳೆ ಹಾನಿ ಸಂಭವಿಸಿದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಬಗದಲ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಕಾಡವಾದ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಣ ಬೇಸಾಯದಲ್ಲಿ ಬೆಳೆಯಲಾಗಿದ್ದ ಉದ್ದು, ಹೆಸರು, ತೋಗರಿ, ಸೋಯಾಬೀನ್ (ಸೋಯಾ) ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸರ್ಕಾರ ಬೆಳೆ ನಷ್ಟಕ್ಕೆ ಸಿಲುಕಿದ ರೈತರಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು.
ಬೀದರ್ ಜಿಲ್ಲೆಯಲ್ಲಿ ಹೆಸರು 20546, ಉದ್ದು 12766, ತೊಗರಿ 20844, ಸೋಯಾ (ಸೋಯಾಬೀನ್) 38379, ಇತರೆ 8268 ಸೇರಿದಂತೆ ಒಟ್ಟು 100803 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಅಧಿವೇಶನದಲ್ಲಿ ಕೂಡ ಬೆಳೆ ಹಾನಿಯ ಬಗ್ಗೆ ಚರ್ಚಿಸುತ್ತೇನೆ. ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕಾಗಿದೆ. ಆದಷ್ಟು ಬೇಗ ಸಮೀಕ್ಷೆ ನಡೆಸಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕ ಸೋಮಶೇಖರ್ ಬಿರಾದಾರ, ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ, ಕೃಷಿ ಅಧಿಕಾರಿ ಸಂಗಮೇಶ ಬಿರಾದಾರ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ರೈತರು ಸೇರಿದಂತೆ ಅನೇಕರಿದ್ದರು.


No comments:
Post a Comment