ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ
ಸಚಿವ ಪ್ರಭು ಚವ್ಹಾಣ್...
ಬೀದರ, ಅ.16:- ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ
ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಶುಕ್ರವಾರ
ಜಿಲ್ಲೆಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ, ನೀರಿನ ಮಟ್ಟ ಹಾಗೂ
ಒಳಹರಿವಿನ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆದರು.
ಈ ವೇಳೆ ಮಾತನಾಡಿದ ಸಚಿವರು, ಪಕ್ಕದ ರಾಜ್ಯಗಳಲ್ಲಿಯೂ ವಿಪರೀತ
ಮಳೆಯಾಗಿರುವುದರಿಂದ ಜಲಾಶಯಕ್ಕೆ ಇನ್ನೂ ಹೆಚ್ಚಿನ
ಪ್ರಮಾಣದಲ್ಲಿ ನೀರು ಹರಿದುಬರುವ ಸಾಧ್ಯತೆಗಳಿವೆ. ಹಾಗಾಗಿ ನದಿ
ಪಾತ್ರದ ಗ್ರಾಮಗಳಲ್ಲಿ ಅಗತ್ಯ ಮುಂಜಾಗ್ರತೆ
ಕೈಗೊಳ್ಳಬೇಕು. ಮುಳುಗಡೆ ಭೀತಿ ಇರುವ
ಗ್ರಾಮಗಳಲ್ಲಿನ ಜನ-ಜಾನುವಾರುಗಳನ್ನು ಸುರಕ್ಷಿತ ಜಾಗಕ್ಕೆ
ಸ್ಥಳಾಂತರ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ
ನಿರ್ದೇಶನ ನೀಡಲಾಗಿದೆ ಎಂದರು.
ಮನೆಗೆ ನೀರು ನುಗ್ಗಿ ಸಂಕಷ್ಟ ಎದುರಿಸುತ್ತಿರುವುದು
ಕಂಡುಬಂದಲ್ಲಿ ತಕ್ಷಣ ಅಂಥವರ ನೆರವಿಗೆ ಧಾವಿಸಬೇಕು. ನೀರು
ಮನೆಗಳಲ್ಲಿ ನುಗ್ಗಿ ಆಹಾರಧಾನ್ಯಗಳೆಲ್ಲವೂ ನಾಶವಾಗುತ್ತವೆ.
ಅಂಥಹ ಕುಟುಂಬಸ್ಥರಿಗೆ ನೆರವು ಕಲ್ಪಿಸಬೇಕು ಯಾರೊಬ್ಬರೂ
ಸಹ ಸಂಕಷ್ಟ ಎದುರಿಸದ ಹಾಗೆ ನೋಡಿಕೊಳ್ಳಬೇಕು. ಕಂದಾಯ
ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಈ ಬಗ್ಗೆ
ಗಮನ ಹರಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಜಿಲ್ಲೆಯ ಹಲವೆಡೆ
ಮನೆಗಳು ಹಾನಿಯಾಗಿರುವ ಘಟನೆಗಳು ನಡೆದಿವೆ. ಕೂಡಲೇ
ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರಿಹಾರ ಬಿಡುಗಡೆಗೆ
ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ
ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಾರ್ವಜನಿಕರಲ್ಲಿ ಮನವಿ: ವ್ಯಾಪಕ ಮಳೆಯಿಂದಾಗಿ ಜಿಲ್ಲೆಯಲ್ಲಿರುವ
ನದಿ, ಹಳ್ಳಗಳು, ಕೆರೆ, ಬಾವಿಗಳೆಲ್ಲಾ ಭರ್ತಿಯಾಗಿವೆ. ಈ
ಸಂದರ್ಭದಲ್ಲಿ ಯಾರೊಬ್ಬರೂ ಕೂಡ ನದಿ, ಹಳ್ಳ ಕೊಳ್ಳ,.....
ಸೇತುವೆಗಳನ್ನು ದಾಟಲು ಪ್ರಯತ್ನಿಸಬಾರದು. ನೀರು ಹರಿಯುವ
ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಬಾರದು
ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ....




No comments:
Post a Comment